ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಪೋಷಕರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ನಡೆದ ಘಟನೆ
ವರದಿ-ಶಾರುಕ್ ಖಾನ್, ಹನೂರು
ಹನೂರು : ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ.
ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಾದಯ್ಯ ರವರ ಪುತ್ರಿ ಶ್ರೇಯಾ(16) ಮೃತಪಟ್ಟ ದುರ್ದೈವಿ.
ಘಟನೆಯ ವಿವರ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನ ಹನ್ನೆರಡು ಗಂಟೆ ವೇಳೆ ಊಟ ತೆಗೆದುಕೊಂಡು ಹೋಗುವ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಬಾಲಕಿ ಕಿರುಚಿಕೊಂಡಿದ್ದಾಳೆ ತಕ್ಷಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯಲು 108 ಆಂಬುಲೆನ್ಸ್ ಕರೆ ಮಾಡಿದ್ದಾರೆ ಆದರೆ ಸಕಾಲಕ್ಕೆ ಆಂಬ್ಯುಲೆನ್ಸ್ ದೊರಕದ ಪರಿಣಾಮ ಖಾಸಗಿ ವಾಹನದಲ್ಲಿ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಆದರೂ ಸಹ ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯು ಎಂಟನೇ ತರಗತಿ ಓದುತ್ತಿದ್ದು ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಮನೆಯಲ್ಲಿದ್ದಳು ಎಂಬುದಾಗಿ ತಿಳಿದುಬಂದಿದೆ.
ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ರಾಮಾಪುರ ಪೊಲೀಸರು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ಬಾಲಕಿಯ ಶವವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ.