ಬೃಹತ್ ಮೆರವಣಿಗೆಯೊಂದಿಗೆ ಎಸ್ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ನಾಮಪತ್ರ ಸಲ್ಲಿಕೆ
ಏಪ್ರಿಲ್ 13, 2023
ಮೈಸೂರು: ವಿಧಾನ ಸಭಾ ಚುನಾವಣೆಗೆ ನರಸಿಂಹರಾಜ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ಗುರುವಾರ ತಮ್ಮ ಅಪಾರ ಬೆಂಬಲಿಗರ ಜತೆ ಮೆರವಣಿಗೆಯಲ್ಲಿ ಸಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಗುರುವಾರ ಬೆಳಿಗ್ಗೆ ನಗರದ ಉದಯಗಿರಿ ಅಲ್ ಬದರ್ ವೃತ್ತದಿಂದ ಬೃಹತ್ ಬೈಕ್ ರ್ಯಾಲಿ ಮೂಲಕ ಚಾಮುಂಡಿ ವಿಹಾರ ಕ್ರೀಡಾಂಗಣಕ್ಕೆ ಆಗಮಿಸಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಬಹುಜನ ಸಮಾಜ ಪಕ್ಷ ಎನ್ಆರ್ ಕ್ಷೇತ್ರ ಸೇರಿದಂತೆ ರಾಜ್ಯದ ವಿವಿಧ ಕಡೆ ಎಸ್ಡಿಪಿಐಗೆ ಬೆಂಬಲ ಸೂಚಿಸಿದೆ. ಹೀಗಾಗಿ ಗುರುವಾರದ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಎಸ್ಪಿ ಕಾರ್ಯಕರ್ತರು ಭಾಗವಹಿಸಿದ್ದುದು ಕಂಡುಬಂತು. ಅಲ್ಲದೇ ಗಮನಾರ್ಹಸಂಖ್ಯೆಯಲ್ಲಿ ಕ್ರೈಸ್ತ ಬಂಧುಗಳೂ ಸಹ ಎಸ್ಡಿಪಿಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು. ಎಸ್ಡಿಪಿಐ ರಾಜ್ಯಾಧ್ಯಕ್ಷರೂ ಆಭ್ಯರ್ಥಿ ಅಬ್ದುಲ್ ಮಜೀದ್ ಮಾತನಾಡಿ, ಹಸಿವು ಮುಕ್ತ ಮತ್ತು ಭಯ ಮುಕ್ತ ಸಮಾಜ ನಿರ್ಮಾಣ ಮಾಡುವುದು ಎಸ್ಡಿಪಿಐ ಉದ್ಧೇಶವಾಗಿದೆ. ಜತೆಗೆ ರಾಜ್ಯದಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ದಲಿತ ಹಿಂದುಳಿದ ಮತ್ತು ಕ್ರೈಸ್ತ ಸಮುದಾಯಕ್ಕೆ ಯಾವುದೇ ರೀತಿಯ ಅಪಾಯ ಎದುರಾದಲ್ಲಿ ಎಸ್ಡಿಪಿಐ ಅವರ ರಕ್ಷಣೆಗೆ ಮುಂದಾಗುತ್ತದೆ ಎಂದರು. ಎನ್ಆರ್ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕನಸು ಹೊಂದಿದ್ದು,ಈ ಬಾರಿ ಕ್ಷೇತ್ರದ ಮತದಾರರು ತಮ್ಮನ್ನು ಬಹುಮತದಿಂದ ಗೆಲ್ಲಿಸುವ ಭರವಸೆ ಇದೆ ಎಂದರು. ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಆರ್.ಶಂಕರ್ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ನಾವುಗಳು ರಾಜ್ಯದ ಹಲವು ಕ್ಷೇತ್ರಗಳಲ್ಲಿ ಎಸ್ಡಿಪಿಐ ಪಕ್ಷಕ್ಕೆಬೆಂಬಲ ನೀಡುತ್ತಿದ್ದೇವೆ.ಅದೇ ರೀತಿ ಅವರೂ ಕೂಡ ವಿವಿಧ ಕ್ಷೇತ್ರಗಳಲ್ಲಿ ನಮಗೆ ಬೆಂಬಲ ನೀಡುತ್ತಿದ್ದಾರೆ. ಎನ್ಆರ್ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರು ಸಹಸ್ರ ಸಂಖ್ಯೆಯಲ್ಲಿದ್ದು, ಎಸ್ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ಅವರ ಪರ ಪ್ರಚಾರ ಮಾಡಲಿದ್ದಾರೆ.ಈ ಬಾರಿ ಎನ್ಆರ್ ಕ್ಷೇತ್ರದಲ್ಲಿ ಅವರ ಗೆಲುವು ನಿಶ್ಚಿತ ಎಂದರು. ರಾಜೀವ್ ನಗರದ ಅಲ್ ಬದರ್ ಸರ್ಕಲ್ ನಿಂದ ಪಕ್ಷದ ಸಾವಿರಾರು ಕಾರ್ಯಕರ್ತರು ಚುನಾವಣಾಧಿಕಾರಿ ಕಚೇರಿ ತನಕ ಮೆರವಣಿಗೆಯಲ್ಲಿ ಬಂದರು. ಅನಂತರ ಅಬ್ದುಲ್ ಮಜೀದ್ ಅವರು ಎಸ್ ಡಿ ಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಜಿಲ್ಲಾ ಧ್ಯಕ್ಷ ರಫತ್ಖಾನ್ ಹಾಗೂ ಬಿ ಎಸ್ ಪಿ ರಾಜ್ಯ ಕಾರ್ಯದರ್ಶಿ ಆರ್ ಶಂಕರ್ ಜತೆಗೂಡಿ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.
ಮೈಸೂರು ನರಸಿಂಹರಾಜ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್ ಡಿ ಪಿ ಐ ಅಭ್ಯರ್ಥಿ ಅಬ್ದುಲ್ ಮಜೀದ್ ಗುರುವಾರ ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಎಸ್ ಡಿ ಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಜಿಲ್ಲಾ ಧ್ಯಕ್ಷ ರಫತ್ಖಾನ್ ಹಾಗೂ ಬಿ ಎಸ್ ಪಿ ರಾಜ್ಯ ಕಾರ್ಯದರ್ಶಿ ಆರ್ ಶಂಕರ್ ಉಪಸ್ಥಿತರಿದ್ದರು .
0 ಕಾಮೆಂಟ್ಗಳು