ಮೈಸೂರು : ಕಾಶ್ಮೀರದ ಪಹಲ್ಲಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಕರ್ನಾಟಕ ರಾಜ್ಯ ರೈತ ಸಂಘಟನೆ(ರೈತಬಣ)ಯ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಖಂಡಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವ ರು, ಕೇಂದ್ರ ಸರ್ಕಾರ ದೇಶದಲ್ಲಿ ಭಯೋತ್ಪಾದನೆ ತಡೆಗಟ್ಟುವಲ್ಲಿ ವಿಫಲವಾಗಿದೆ. ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿ
ಅತ್ಯಂತ ಪೈಶಾಚಿಕ ಕೃತ್ಯ, ಘಟನೆಯಲ್ಲಿ ಹಲವು ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದು, ಕೆಲವರಿಗೆ ಗಾಯವಾಗಿದೆ. ಘಟನೆಯಲ್ಲಿ ಕರ್ನಾಟಕದ ಶಿವಮೊಗ್ಗದ ಮಂಜುನಾಥ್ ರಾವ್ ಸಾವನ್ನಪ್ಪಿರುವುದು ಸಹ ಅತ್ಯಂತ ಖಂಡನೀಯ ಎಂದು ಕೃಷ್ಣೇಗೌಡ ಕಂಬನಿ ಮಿಡಿದಿದ್ದಾರೆ.
ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ನಿಯಂತ್ರಿಸುವಲ್ಲಿ ವಿಫಲವಾದ ಪರಿಣಾಮ ಭಯೋತ್ಪಾದಕರು ಪ್ರವಾಸಿಗರ ಮೇಲೂ ದಾಳಿ ನಡೆಸಿದ್ದು ಹೇಯ ಕೃತ್ಯ, ಇದಕ್ಕೆ ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಬಲಿಯಾಗಿದ್ದಾರೆ. ಕೇಂದ್ರ ಸರ್ಕಾರ ಉದ್ಯಮಿ ಕುಟುಂಬಕ್ಕೆ 50 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ರಾಜ್ಯ ಸರ್ಕಾರವೂ ಕೂಡ ಮೃತ ಮಂಜುನಾಥ್ ಅವರ ಪಾರ್ಥೀವ ಶರೀರವನ್ನು ಕಾಶ್ಮೀರದಿಂದ ಶಿವಮೊಗ್ಗಕ್ಕೆ ತರಲು ನೆರವು ನೀಡಬೇಕು. ಜತೆಗೆ ಸೂಕ್ತ ಪರಿಹಾರವನ್ನೂ ನೀಡಬೇಕೆಂದು ಒತ್ತಾಯಿಸಿದರು.
ಮಂಜುನಾಥ್ ಅವರ ಹತ್ಯೆಯಿಂದ ಅವರ ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಅವರು ಭಯಭೀತರಾಗಿದ್ದಾರೆ. ಕೇಂದ್ರ ಸರ್ಕಾರ ಅವರಿಗೆ ಆತ್ಮಸ್ಥೈಯ ತುಂಬಿ ಅವರನ್ನು ಸುರಕ್ಷಿತವಾಗಿ ಕನ್ನಡ ನಾಡಿಗೆ ಕಳುಹಿಸಬೇಕು. ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ತಕ್ಷಣ ಕಾರ್ಯಪ್ರವತ್ತರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಅಧಿಕಾರಿಗಳ ಒಂದು ತಂಡವನ್ನು ಕಾಶ್ಮೀರಕ್ಕೆ ಕಳಿಸಿರುವುದು ಶ್ಲಾಘನೀಯ ಎಂದು ಹೇಳಿದರು.
0 ಕಾಮೆಂಟ್ಗಳು